ಕಾರವಾರ:
ಅರಣ್ಯ ಹಕ್ಕು ಕಾಯ್ದೆ ಅಡಿ ಹಕ್ಕುಪತ್ರಕ್ಕಾಗಿ ಸಲ್ಲಿಸಿರುವ ಅರ್ಜಿಗಳ ಪೈಕಿ ಈಗಾಗಲೇ ತಿರಸ್ಕರಿಸಲಾಗಿರುವ ಅರ್ಜಿಗಳನ್ನು ಮರು ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಉಪವಿಭಾಗಾಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅರಣ್ಯ ಹಕ್ಕು ಪತ್ರ ನೀಡಿಕೆ ಪ್ರಗತಿ ಪರಿಶೀಲನೆ ನಡೆಸಿದರು.
ಗ್ರಾಮ ಅರಣ್ಯ ಹಕ್ಕು ಸಮಿತಿ ಮಟ್ಟದಲ್ಲಿ ಹೊರತುಪಡಿಸಿ ಉಪವಿಭಾಗಾಧಿಕಾರಿ ಮಟ್ಟದಲ್ಲಿ ವಿವಿಧ ಕಾರಣಗಳಿಗಾಗಿ ತಿರಸ್ಕರಿಸಿರುವ ಅರ್ಜಿಗಳ ಮರು ಪರಿಶೀಲನೆ ನಡೆಸಬೇಕು. ಕಂದಾಯ ಭೂಮಿ, ಸೊಪ್ಪಿನ ಬೆಟ್ಟ ಇತ್ಯಾದಿ ಪ್ರಕರಣಗಳನ್ನು ಹೊರತುಪಡಿಸಿ ಇತರೆಲ್ಲಾ ಅರ್ಜಿಗಳ ಮರುಪರಿಶೀಲನೆ ನಡೆಸಬೇಕು. ಅರಣ್ಯ ಹಕ್ಕು ಕಾಯ್ದೆಯಡಿ ಉಪವಿಭಾಗಾಧಿಕಾರಿ ಮಟ್ಟದಲ್ಲಿ ಸಹ ಸಮಿತಿ ಇದ್ದು, ಯಾವುದೇ ತೀರ್ಮಾನಗಳನ್ನು ಕೈಗೊಳ್ಳುವ ಮೊದಲು ಸಮಿತಿಯ ಒಪ್ಪಿಗೆ ಪಡೆದುಕೊಳ್ಳಬೇಕು. ಅಂತಿಮವಾಗಿ ಆದೇಶ ಪತ್ರದಲ್ಲಿ ಸಹ ಸಮಿತಿಯ ಎಲ್ಲಾ ಸದಸ್ಯರ ಸಹಿ ಇರಬೇಕು ಎಂದು ಸಚಿವರು ಸ್ಪಷ್ಟಪಡಿಸಿದರು.
ಕೆಲವು ಅಧಿಕಾರಿಗಳು ಸುತ್ತೋಲೆಗಳನ್ನು ಮುಂದಿರಿಸಿಕೊಂಡು ಹಾದಿ ತಪ್ಪಿಸುವ ಕಾರ್ಯ ಮಾಡುವುದು ಸರಿಯಲ್ಲ. ಕಾಯ್ದೆಗಿಂತ ಮಿಗಿಲಾದುದು ಯಾವುದೂ ಇಲ್ಲ. ಅರಣ್ಯ ಹಕ್ಕು ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಲು ಪ್ರತಿಯೊಬ್ಬ ಅಧಿಕಾರಿ ಜವಾಬ್ದಾರರಾಗಿದ್ದಾರೆ ಎಂದು ಸಚಿವರು ಹೇಳಿದರು.
ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಸಿರುವ ಅರ್ಜಿಗಳನ್ನು ಪೂರ್ಣವಾಗಿ ವಿಲೇವಾರಿ ಮಾಡದೆ ಅರಣ್ಯ ಸಂರಕ್ಷಣೆ ಸಾಧ್ಯವಿಲ್ಲ. ಪ್ರತಿ ತಾಲೂಕಿನಲ್ಲಿ ಉಪವಿಭಾಗಾಧಿಕಾರಿಗಳು ತಿಂಗಳಿಗೆ ಮೂರು ದಿನ ಈ ಅರ್ಜಿಗಳ ವಿಲೇವಾರಿಗೆ ಸಮಯ ನಿಗದಿಪಡಿಸಬೇಕು. ಗ್ರಾಮ ಮಟ್ಟದಲ್ಲಿ ಬಾಕಿಯಿರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಗ್ರಾಮ ಅರಣ್ಯ ಸಮಿತಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಅವರು ಸೂಚಿಸಿದರು.
ಜಿಲ್ಲೆಯಲ್ಲಿ ಅರಣ್ಯ ಹಕ್ಕು ಕಾಯ್ದೆಯಡಿ ಒಟ್ಟು 98727ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಪರಿಶಿಷ್ಟ ಪಂಗಡಕ್ಕೆ ಸಂಬಂಧಿಸಿದಂತೆ 3382 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, 1661 ಪ್ರಕರಣಗಳಲ್ಲಿ ಹಕ್ಕು ಪತ್ರ ವಿತರಿಸಲಾಗಿದೆ. 960ಪ್ರಕರಣಗಳನ್ನು ತಿರಸ್ಕರಿಸಲಾಗಿದೆ. ತಿರಸ್ಕøತಗೊಂಡ ಅರ್ಜಿದಾರರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ ಎಂದು ಸಮಾಜ ಕಲ್ಯಾಣಾಧಿಕಾರಿ ಅಲ್ಲಾಭಕಷ್ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ, ಶಾಸಕರಾದ ಮಂಕಾಳು ವೈದ್ಯ, ಶಿವರಾಮ ಹೆಬ್ಬಾರ, ಎಸ್.ಎಲ್.ಘೋಟ್ನೇಕರ್, ಉಪಾಧ್ಯಕ್ಷ ಸಂತೋಷ ಶಂಕರ ರೇಣಕೆ, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಲ್.ಚಂದ್ರಶೇಖರ ನಾಯಕ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
Leave a Comment