ಕಾರವಾರ:
ಗೋವಾ ರಾಜ್ಯದಿಂದ ಅಕ್ರಮ ಮದ್ಯ ಸಾಗಾಟ ಮತ್ತು ಮಾರಾಟ ತಡೆಗಟ್ಟಲು ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಹೆಚ್.ಸಿ.ರುದ್ರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ಜಿಲ್ಲೆಯಲ್ಲಿ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಬಗ್ಗೆ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಗೋವಾದಿಂದ ಅಕ್ರಮವಾಗಿ ಮದ್ಯಸಾಗಾಟ ಮಾಡುವ ಮೂಲಗಳನ್ನು ಪತ್ತೆಹಚ್ಚಿ ಪಿಡುಗು ನಿರ್ಮೂಲನೆಗೊಳಿಸಬೇಕು. ಮದ್ಯಪಾನದಿಂದ ಹಲವಾರು ಕುಟುಂಬಗಳು ಬೀದಿಪಾಲಾಗುತ್ತಿದ್ದು, ಅಕ್ರಮ ಮದ್ಯ ಸಾಗಾಟ ಮತ್ತು ಮಾರಾಟ ನಿಯಂತ್ರಿಸಿದರೆ ಪರಿಸ್ಥಿತಿ ಸುಧಾರಿಸಲು ಸಾಧ್ಯವಿದೆ. ಇದೇ ರೀತಿ ಸಣ್ಣಪುಟ್ಟ ಗೂಡಂಗಡಿಗಳಲ್ಲಿ ಮದ್ಯ ಮಾರಾಟ ತಡೆಗೆ ನಿರಂತರ ನಿಗಾ ವಹಿಸಬೇಕು ಎಂದು ಅವರು ಹೇಳಿದರು. ಸಂಪೂರ್ಣ ಪಾನ ನಿಷೇಧ ಮಾಡಲು ಮುಂದೆ ಬರುವ ಗ್ರಾಮ ಪಂಚಾಯತ್ಗಳನ್ನು ಗುರುತಿಸಿ ಅವರಿಗೆ ನಗದು ಬಹುಮಾನ ನೀಡಿ ಪ್ರೋತ್ಸಾಹಿಸುವ ಕಾರ್ಯವನ್ನು ಮಂಡಳಿ ವತಿಯಿಂದ ಮಾಡಿದರೆ, ಗ್ರಾಮಗಳಲ್ಲಿ ಮದ್ಯಪಾನ ವಿರುದ್ಧ ಜಾಗೃತಿ ಮೂಡಲು ಸಾಧ್ಯವಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಳಿದರು.
ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆಗೆ ಬಲಿಯಾಗದಂತೆ ಎಚ್ಚರಿಕೆ ವಹಿಸಬೇಕು. ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಸತಿ ನಿಲಯಗಳಲ್ಲಿ ಈ ಕುರಿತು ನಿರಂತರ ಜಾಗ್ರತೆ ವಹಿಸಬೇಕು. ವಿದ್ಯಾರ್ಥಿಗಳಲ್ಲಿ ಮಾದಕ ವಸ್ತು ಸೇವನೆ ವಿರುದ್ದ ಜಾಗೃತಿ ಮೂಡಿಸಬೇಕು. ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ರಾಜ್ಯದ ವಿವಿಧ ಕಡೆಗಳಲ್ಲಿ ನಿರಂತರವಾಗಿ ಮದ್ಯವರ್ಜನೆ ಶಿಬಿರ ಆಯೋಜಿಸುತ್ತಿದ್ದು, ಮಂಡಳಿ ಈ ಕಾರ್ಯದಲ್ಲಿ ಸಹಕರಿಸುತ್ತಿದೆ. ಆಸ್ಪತ್ರೆಗಳಿಗೆ ದಾಖಲಾಗುವ ಕುಡುಕರಿಗೆ ಸೂಕ್ತ ಚಿಕಿತ್ಸೆ ನೀಡಿ, ಕುಡಿತ ದುಷ್ಪರಿಣಾಮಗಳ ಕುರಿತು ಅವರಿಗೆ ಆಪ್ತ ಸಮಾಲೋಚನೆ ನೀಡಿ ಪಿಡುಗು ಮುಕ್ತರಾಗಲು ನೆರವು ನೀಡಬೇಕು ಎಂದು ಅಧ್ಯಕ್ಷರು ತಿಳಿಸಿದರು.
ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮದ್ಯಪಾನದ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲು ರಾಜ್ಯದಾದ್ಯಂತ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಇದಕ್ಕಾಗಿ ವಿವಿಧ ಇಲಾಖೆಗಳ ಸಹಯೋಗವನ್ನು ಪಡೆದುಕೊಳ್ಳಲಾಗುವುದು. ಬೀದಿನಾಟಕ, ಶಾಲಾ ಕಾಲೇಜುಗಳಲ್ಲಿ ಅರಿವು ಕಾರ್ಯಕ್ರಮ, ಜಾತ್ರೆಗಳಲ್ಲಿ ಮದ್ಯಪಾನ ದುಷ್ಪರಿಣಾಮಗಳ ಕುರಿತು ಅರಿವು, ವಿಶ್ವ ಮಾದಕ ವಸ್ತು ವಿರೋಧಿ ಸಪ್ತಾಹ ಆಚರಣೆ ಇತ್ಯಾದಿ ಕಾರ್ಯಕ್ರಮಗಳನ್ನು ಮಂಡಳಿ ಆಯೋಜಿಸುತ್ತಿದೆ ಎಂದರು.
ಮದ್ಯಪಾನ ಸಂಯಮ ಮಂಡಳಿ ಸದಸ್ಯ ವಿ.ಎಲ್.ನಾಯಕ್, ಪೊಲೀಸ್ ವರಿಷ್ಟಾಧಿಕಾರಿ ವಿನಾಯಕ ಪಾಟೀಲ್ ವಿವಿಧ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
Leave a Comment