ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿ ಸಭಾಂಗಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ದೇಶದ ಅಭಿವೃದ್ಧಿ ಹಾಗೂ ಆರ್ಥಿಕ ಸದೃಢತೆಗೆ ಜನಸಂಖ್ಯೆಯನ್ನು ನಿಯಂತ್ರಿಸುವ ಅಗತ್ಯವಿದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಅಭಿಪ್ರಾಯ ವ್ಯಕ್ತಪಡಿಸಿದರು.ಹೆಚ್ಚುತ್ತಿರುವ ಜನಸಂಖ್ಯೆ ದೇಶದ ಪ್ರಗತಿಗೆ ಮಾರಕವಾಗಿದೆ. ಎಲ್ಲರಿಗೂ ಉತ್ತಮ ಶಿಕ್ಷಣ, ಆರೋಗ್ಯ, ಮೂಲಸೌಕರ್ಯಗಳನ್ನು ಕಲ್ಪಿಸಲು ಜನಸಂಖ್ಯೆ ತೊಡಕಾಗಿದ್ದು, ಇದರ ಕುರಿತು ಪ್ರತಿಯೊಬ್ಬರೂ ಯೋಚಿಸಬೇಕಾದ ಅಗತ್ಯವಿದೆ ಎಂದು ಅವರು ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ಡಾ. ಕ್ಯಾಪ್ಟನ್ ರಮೇಶ ರಾವ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಇದೇ ವೇಗದಲ್ಲಿ ಜನಸಂಖ್ಯೆ ಬೆಳೆದರೆ ದೇಶದ ಜನಸಂಖ್ಯೆ ಮುಂದಿನ 35ವರ್ಷಗಳಲ್ಲಿ 200ಕೋಟಿ ತಲುಪುವ ಸಾಧ್ಯತೆಯಿದೆ. ಪ್ರತಿ ವರ್ಷ ದೇಶದಲ್ಲಿ 1.55ಕೋಟಿ ಜನಸಂಖ್ಯೆ ಹೆಚ್ಚುತ್ತಿದೆ. ಕರ್ನಾಟಕದಲ್ಲಿ ಪ್ರತಿ ವರ್ಷ 7.75ಲಕ್ಷ ಜನಸಂಖ್ಯೆ ಹೆಚ್ಚುತ್ತಿದೆ. ವಿಶ್ವದ ಜನಸಂಖ್ಯೆಗೆ ಭಾರತದ ಕೊಡುಗೆ ಶೇ.17ರಷ್ಟು ಇದೆ. ಇವರೆಲ್ಲರಿಗೂ ಪೌಷ್ಟಿಕ ಆಹಾರ, ಶುದ್ಧ ಕುಡಿಯುವ ನೀರು, ವಸತಿ ಸೌಲಭ್ಯ ಒದಗಿಸುವುದು ಸವಾಲಿನ ಕೆಲಸವಾಗಿದೆ. ಮತ್ತು ಬಡತನ ಹಾಗೂ ನಿರುದ್ಯೋಗ ಸಮಸ್ಯೆ ತೀವ್ರವಾಗಿ ಕಾಡಲಿದೆ ಎಂದು ಹೇಳಿದರು. ಕಾರವಾರ ನಗರಸಭೆ ಅಧ್ಯಕ್ಷ ಗಣಪತಿ ವಿ. ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಪ್ರಭಾರ ಡಿ.ಎಚ್.ಒ ಡಾ. ಶಂಕರ ರಾವ, ನಗರಸಭೆ ಉಪಾಧ್ಯಕ್ಷೆ ಲೀಲಾಬಾಯಿ ಠಾಣೇಕರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಸಭಾ ಕಾರ್ಯಕ್ರಮಕ್ಕೆ ಮೊದಲು ಆಯೋಜಿಸಲಾಗಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಚಾಲನೆ ನೀಡಿದರು. ಜಾಥಾದಲ್ಲಿ ಆಶಾ ಕಾರ್ಯಕರ್ತೆಯರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಸ್ವಯಂ ಸೇವಾ ಸಂಸ್ಥೆಗಳ ಕಾರ್ಯಕರ್ತೆಯರು ಮತ್ತಿತರರು ಭಾಗವಹಿಸಿದ್ದರು.
Leave a Comment