ಕಾರವಾರ:
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಬೆಂಬಲಿತ ವಿದ್ಯಾರ್ಥಿಗಳು ಜಿಲ್ಲಾಡಳಿತ ಮುಂಭಾಗ ಶನಿವಾರ ಪ್ರತಿಭಟನೆ ನಡೆಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿಗಳ ವಿರುದ್ದ ವಿದ್ಯಾರ್ಥಿಗಳು ದಿಕ್ಕಾರ ಕೂಗಿದರು.ಗ್ರಾಮೀಣ ಭಾಗದಿಂದ ಪಾಸ್ ಹೊಂದಿರುವ ವಿದ್ಯಾರ್ಥಿಗಳಿಗೆ ನಗರ ಸಾರಿಗೆ ಬಸ್ಗಳಲ್ಲೂ ಪ್ರಯಾಣಿಸಲು ಅವಕಾಶ ಕಲ್ಪಿಸಬೇಕು. ಬಸ್ ಸೌಕರ್ಯವಿಲ್ಲದ ಕೆಲ ಗ್ರಾಮೀಣ ಪ್ರದೇಶಗಳಿಗೆ ಬಸ್ ಸಂಚಾರ ಆರಂಭಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದರು. ಅನುಸೂಚಿತ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿಗಳಿಗೆ ಸರಕಾರ ನೀಡುತ್ತಿರುವ ಉಚಿತ ಬಸ್ ಪಾಸ್ ಸೌಲಭ್ಯವನ್ನು ಎಲ್ಲ ವರ್ಗದ ಬಡ ವಿದ್ಯಾರ್ಥಿಗಳಿಗೆ ವಿಸ್ತರಿಸಬೇಕು ಎಂದು ಆಗ್ರಹಿಸಿದರು. ಮಾಲಾದೇವಿ ಮೈದಾನದಿಂದ ಎಬಿವಿಪಿ ಕಾರ್ಯಕರ್ತರು ಮೆರವಣಿಗೆ ಹೊರತು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಬೇಡಿಕೆಗಳನ್ನು ಪೂರೈಸಬೇಕು ಎಂದು ಆಗ್ರಹಿಸಿದರು. ಸರಕಾರ ಅನುಸೂಚಿತ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಮುಂದಾಗಿರುವುದು ಸ್ವಾತಾರ್ಹ ಕ್ರಮವಾಗಿದೆ. ಆದರೆ ಕಳೆದ 2-3 ವರ್ಷಗಳಿಂದ ರಾಜ್ಯ ಬರಗಾಲ ಸ್ಥಿತಿ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಬಡ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ತೊಂದರೆಯಾಗುತ್ತಿದೆ. ಅದರಲ್ಲೂ ಬಸ್ ಪಾಸ್ ಪಡೆಯುವ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರೇ ಹೆಚ್ಚಾಗಿದ್ದು ಬಡ ರೈತರ ಮಕ್ಕಳಿಗೆ ಆರ್ಥಿಕ ಅನಾನುಕೂಲ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರಕಾರ ಎಲ್ಲ ವರ್ಗದ ಬಡ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸಬೇಕು ಎಂದು ಮನವಿಯಲ್ಲಿ ಪ್ರಸ್ತಾಪಿಸಲಾಗಿದೆ. ಅಲ್ಲದೇ ಬಹುತೇಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮ ಊರಿನಿಂದ ನಗರದವರೆಗೆ ಬರಲು ಮಾತ್ರ ಪಾಸ್ ಸೌಲಭ್ಯವಿರುತ್ತದೆ. ನಗರದ ಮುಖ್ಯ ಬಸ್ ನಿಲ್ದಾಣದಿಂದ ಕಾಲೇಜಿನವರೆಗೆ ತೆರಳಲು ಪಾಸ್ ಸೌಲಭ್ಯವಿರುವುದಿಲ್ಲ ಎಂದು ಹೇಳಿದರು.ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿಭಾಗದ ಸಂಚಾಲಕ ಕೃಷ್ಣ ಬಲ್ಸೆ, ನಗರ ಕಾರ್ಯದರ್ಶಿ ಭಾನುಪ್ರಕಾಶ ಕುಡ್ತಲರ್, ನಮ್ರಿನ್, ಆಸ್ಮಾ, ಸಿದ್ದು ಮದರಕಂಠಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Leave a Comment