ಕಾರವಾರ: ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸದ ಸರ್ಕಾರದ ವಿರುದ್ದ ಸೆ. 14ರಂದು ರಾಜ್ಯದ ನಾನಾ ಜಿಲ್ಲೆಯ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು ಬೆಂಗಳೂರಿನಲ್ಲಿ ದರಣಿ ನಡೆಸಲಿದ್ದಾರೆ ಎಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಆರ್ ಶಾನಭಾಗ ತಿಳಿಸಿದರು.
ಶುಕ್ರವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಹಿಂದಿನಿಂದಲೂ ಕಾರ್ಮಿಕರು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟಿಸುತ್ತಲೇ ಬಂದಿದ್ದಾರೆ. ಪ್ರತಿಭಟನೆ ವೇಳೆ ಬೇಡಿಕೆ ಈಡೇರಿಸುವ ಆಶ್ವಾಸನೆ ನೀಡುವ ಸರ್ಕಾರ ನಂತರ ಕಾರ್ಮಿಕರಿಗೆ ಸೌಲಭ್ಯ ಒದಗಿಸಲು ಹಿಂದೇಟು ಹಾಕುತ್ತಿದೆ. ಹೀಗಾಗಿ ಸೆ. 14 ರಂದು ಲಕ್ಷಾಂತರ ಕಾರ್ಮಿಕರು ಬೆಂಗಳೂರಿಗೆ ತೆರಳಿ ದರಣಿ ನಡೆಸಲಿದ್ದಾರೆ ಎಂದು ಎಚ್ಚರಿಸಿದರು. ಕಾರ್ಮಿಕರಿಗೆ ಕನಿಷ್ಟ 18 ಸಾವಿರ ರೂ ಮಾಸಿಕ ವೇತನ ನೀಡಬೇಕು. ಕನಿಷ್ಟ ಕೂಲಿ ಕಾಯಿದೆಯನ್ನು ಕೂಡಲೇ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಗುತ್ತಿಗೆ ಕಾರ್ಮಿಕರ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ರಾಜ್ಯದ ಖಾಸಗಿ ಕ್ಷೇತ್ರದಲ್ಲಿ ಶೇ. 60 ರಷ್ಟು ಹಾಗೂ ಸರ್ಕಾರಿ ಕ್ಷೇತ್ರದಲ್ಲಿ ಶೇ. 50ರಷ್ಟು ಕಾರ್ಮಿಕರು ಗುತ್ತಿಗೆ ಆಧಾರಿತವಾಗಿ ದುಡಿಯುತ್ತಿದ್ದಾರೆ. ಅವರ ಕೆಲಸಕ್ಕೆ ಸಮನಾದ ವೇತನ ದೊರೆಯುತ್ತಿಲ್ಲ ಎಂದು ದೂರಿದರು. ಸರ್ವೋಚ್ಚ ನ್ಯಾಯಾಲಯದ ತೀರ್ಫನ್ನು ಉಲ್ಲಂಗಿಸಿ ಕಾರ್ಮಿಕರನ್ನು ದುಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. ಹಮಾಲಿ. ಕಟ್ಟಡ ಕಾರ್ಮಿಕರು ಸೇರಿದಂತೆ ಹಲವು ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು. ಅಂಗನವಾಡಿ ಬಿಸಿಯೂಟ ಹಾಗೂ ಆಶಾ ಕಾರ್ಯಕರ್ತೆಯರನ್ನು ಕನಿಷ್ಟ ಕೂಲಿ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು. ಇದಲ್ಲದೇ ಕಾರ್ಮಿಕ ಸಂಘಗಳಿಗೆ ಕಡ್ಡಾಯ ಮಾನ್ಯತೆ ನೀಡಬೇಕು. ಸಾರ್ವಜನಿಕ ಉದ್ದಿಮೆಗಳನ್ನು ಖಾಸಗಿಕರಣ ಮಾಡಬಾರದು. 0ರಾಜ್ಯದಲ್ಲಿ ಕಾರ್ಮಿಕ ಸಮ್ಮೇಳನ ನಡೆಸಬೇಕು ಎಂದು ಆಗ್ರಹಿಸಿ ದರಣಿ ನಡೆಸುವದಾಗಿ ಹೇಳಿದರು. ರಾಜ್ಯ ಕಾರ್ಯದರ್ಶಿ ಯಮುನಾ ಗಾಂವ್ಕರ್ ಇತರರಿದ್ದರು.
Leave a Comment