ಕಾರವಾರ: ಬಾಲ್ಯ ವಿವಾಹವೂ ನಮ್ಮ ಸಮಾಜದಲ್ಲಿ ಇನ್ನೂ ಅಸ್ತಿತ್ವದಲ್ಲಿರುವ ಅನಿಷ್ಠ ಪದ್ದತಿಯಾಗಿದ್ದು ಅದನ್ನು ತಡೆಗಟ್ಟುವದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದರು.
ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರವಾರ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಬಾಲ್ಯ ವಿವಾಹ ತಡೆಯುವಲ್ಲಿ ವಿವಿಧ ಇಲಾಖೆಗಳ ಸಮಯನ್ವಯತೆ ಮತ್ತು ಸಹಕಾರದ ಬಗ್ಗೆ ಜಿಲ್ಲಾ ಮಟ್ಟದ ಕಾರ್ಯಗಾರವನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಲ್ ಚಂದ್ರಶೇಖರ ನಾಯಕ ಮಾತನಾಡಿ ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಗ್ರಾಮ ಸಭೆಗಳನ್ನು ನಡೆಸಿ ಗ್ರಾಮೀಣ ಜನರಲ್ಲಿ ಅರಿವು ಮೂಡಿಸಲು ವಿವಿಧ ಇಲಾಖೆಗಳ ಸಹಕಾರ ಅತ್ಯಗತ್ಯ ಎಂದು ಹೇಳಿದರು. ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಸದಸ್ಯ ಕಾರ್ಯದರ್ಶಿ ಗೋವಿಂದಯ್ಯ ಟಿ. ಉಪನ್ಯಾಸ ನೀಡಿ ನಮ್ಮ ಗ್ರಾಮಾಂತರ ಪ್ರದೇಶಗಳಲ್ಲಿ ಹೆಣ್ಣು ಕುಟುಂಬಕ್ಕೆ ಹೊರೆ ಎಂದು ಭಾವಿಸಿ ಬೇಗನೆ ಮದುವೆ ಮಾಡಿಕೊಡಲಾಗುತ್ತದೆ. ಬಾಲ್ಯ ವಿವಾಹ ಸಾಮಾಜಿಕ ಪಿಡುಗುಗಳಲ್ಲೊಂದಾಗಿದೆ. ಬಾಲ್ಯ ವಿವಾಹ ಅಪರಾಧವೆಂದು ಕಾನೂನು ಜಾರಿಯಲ್ಲಿದ್ದರೂ ಕೂಡಾ ಜನಸಾಮಾನ್ಯರಿಗೆ ಅರಿವು ಇರುವದಿಲ್ಲ. ಜನರಲ್ಲಿ ಕಾನೂನು ಬಗ್ಗೆ ಜಾಗೃತಿ ಇಲ್ಲದಿದ್ದರೆ ಅಂತಹ ಕಾನೂನು ವ್ಯರ್ಥ, ಅಪ್ರಾಪ್ತರಿಗೆ ಮದುವೆ ಮಾಡುವದರಿಂದ ಸಮಸ್ಯೆಗಳೆ ಉಂಟಾಗುತ್ತವೆ. ಹೆಣ್ಣಿರಲಿ, ಗಂಡಿರಲಿ ಒಟ್ಟಿನಲ್ಲಿ ಎಲ್ಲರೂ ಬಾಲ್ಯ ವಿವಾಹ ತಡೆಗಟ್ಟಬೇಕು ಎಂದು ಹೇಳಿದರು.
ಡಿ.ಸಿ.ಐ.ಬಿ.ಯ ಪೋಲೀಸ್ ಇನ್ಸ್ಪೆಕ್ಟರ್ ಶರಣ ಗೌಡ ಬಾಲ್ಯ ವಿವಾಹ ತಡೆಯುವಲ್ಲಿ ವಿವಿಧ ಇಲಾಖೆಗಳ ಸಮನ್ವಯತೆ ಮತ್ತು ಸಹಕಾರ ಕುರಿತು ಮಾತನಾಡಿ ಬಾಲ್ಯ ವಿವಾಹವನ್ನು ತಡೆ ಗಟ್ಟುವದು ಕೇವಲ ಪೊಲೀಸ್ ಅಥವಾ ಂಯಾವುದೇ ಒಂದು ಇಲಾಖೆ ಕಾರ್ಯವಲ್ಲ. ಬಾಲ್ಯ ವಿವಾಹವನ್ನು ತಡೆಗಟ್ಟಲು ಗ್ರಾಮ ಪಂಚಾಯತ್ ನಗರಸಭೆ, ತಾಲೂಕು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ವಿವಿಧ ಇಲಾಖೆಗಳು ಕಾರ್ಯ ನಿರ್ವಹಿಸುತ್ತವೆ. ಬಾಲ್ಯ ವಿವಾಹ ತಡೆಗಟ್ಟಲು ದೂರು ನೀಡಿದವರ ಮಾಹಿತಿಯನ್ನು ಗೌಪ್ಯವಾಗಿಡಲಾಗುವದರಿಂದ ನಿರ್ಭಯದಿಂದ ಸಿಬ್ಬಂಧಿಗಳು ಕಾರ್ಯನಿರ್ವಹಿಸಿ ಎಂದು ಶಿಬಿರಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿದೇಶಕ ರಾಜೇಂದ್ರ ಬೇಕಲ್ ಮಾತನಾಡಿ ಬಾಲ್ಯ ವಿವಾಹ ನಿಷೇದ ಕಾಯಿದೆ 2006ರನ್ನು ಜಿಲ್ಲೆಯಾದ್ಯಂತ ಸಂಪೂರ್ಣವಾಗಿ ಜಾರಿಗೊಳಿಸುವದು ನಮ್ಮ ಮುಖ್ಯ ಉದ್ದೇಶವೆಂದು ಹೇಳಿದರು. ಕಾರ್ಯಗಾರದಲ್ಲಿ ವಿವಿಧ ಇಲಾಖೆಗಳ ಸಿಬ್ಬಂದಿ, ಅಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆ ಪಧಾಧಿಕಾರಿಗಳು ಉಪಸ್ಥಿತರಿದ್ದರು.
Leave a Comment