ಕಾರವಾರ:
ಕರಾವಳಿಯಲ್ಲಿ ಸುರಿಯುತ್ತಿರುವ ಬಾರೀ ಮಳೆಯಿಂದಾಗಿ ಜನ ಜೀವನ ಹಾಗೂ ಸಂಚಾರ ಅಸ್ಥವ್ಯಸ್ಥಗೊಂಡಿದೆ. ತಗ್ಗು ಪ್ರದೇಶದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಹಾಗೂ ಮನೆಗಳ ಒಳಗೆ ನೀರು ನುಗ್ಗಿದ್ದು ಜನ ತೊಂದರೆ ಅನುಭವಿಸುತ್ತಿದ್ದಾರೆ.
ಕರಾವಳಿಯಲ್ಲಿ ಶುಕ್ರವಾರದಿಂದ ಎಡಬಿಡದೇ ಮಳೆ ಸುರಿಯುತ್ತಿದೆ. ಪರಿಣಾಮ ಅಲ್ಲಲ್ಲಿ ಗುಡ್ಡ ಕುಸಿತ, ರಸ್ತೆಗೆ ಅಡ್ಡಲಾಗಿ ಮರ ಬೀಳುವದು, ವಿದ್ಯುತ್ ಕಡಿತ ಸಾಮಾನ್ಯವಾಗಿದೆ. ಕಾರವಾರದಿಂದ ಭಟ್ಕಳದ ವರೆಗೆ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ನಡೆಯುತ್ತಿದ್ದು, ಎಲ್ಲೆಂದರಲ್ಲಿ ಹೊಂಡಗಳು ನಿರ್ಮಾಣವಾಗಿದೆ. ಎಲ್ಲಾ ಹೊಂಡಗಳಲ್ಲಿಯೂ ನೀರು ತುಂಬಿರುವದರಿಂದ ಹೆದ್ದಾರಿ ಪ್ರಯಾಣಿಕರು ಜೀವಭಯದೊಂದಿಗೆ ಸಂಚರಿಸಬೇಕಾದ ಪರಿಸ್ಥಿತಿ ಬಂದಿದೆ. ತಗ್ಗು ಪ್ರದೇಶಗಳೆಲ್ಲವೂ ಜಲಾವೃತವಾಗಿದೆ. ಕೆಲ ಮನೆಗಳಲ್ಲಿ ಇರಿಸಿದ್ದ ಪಾತ್ರೆ ಹಾಸಿಗೆಗಳು ಮಳೆಗೆ ಕೊಚ್ಚಿ ಹೋಗಿವೆ. ಮಳೆಯೂ ಕೊಳಚೆ ನೀರನ್ನು ಸಂಗ್ರಹಿಸಿ ನಗರ ಪ್ರದೇಶದಲ್ಲಿ ಬಿಡುತ್ತಿರುವದರಿಂದ ಜನ ಸಾಂಕ್ರಾಮಿಕ ರೋಗಗಳ ಭೀತಿಯಲ್ಲಿದ್ದಾರೆ. ಮಳೆ ರಭಸಗೊಂಡಿದ್ದರಿಂದ ಜಿಲ್ಲೆಯಲ್ಲಿ ಪ್ರವಾಸೋಧ್ಯಮ ಚಟುವಟಿಕೆ ಚುರುಕುಗೊಂಡಿದ್ದು, ಅಪಾಯಗಳ ಬಗ್ಗೆ ತಿಳುವಳಿಕೆಯಿಲ್ಲದೇ ಚಾರಣ ಮಾಡುತ್ತಿರುವವರು ಸಂಕಷ್ಟ ಎದುರಿಸುತ್ತಿದ್ದಾರೆ.
ಕಳೆದ ಎರಡು ದಿನಗಳಿಂದ ಅಂಕೋಲಾ, ಕುಮಟಾ, ಗೋಕರ್ಣ, ಹೊನ್ನಾವರ, ಭಟ್ಕಳದಲ್ಲಿ ಬಾರೀ ಪ್ರಮಾಣದ ಮಳೆ ಸುರಿಯುತ್ತಿದೆ. ದಾಂಡೇಲಿ ಜೊಯಿಡಾ ಭಾಗದಲ್ಲಿಯೂ ವ್ಯಾಪಕ ಮಳೆಯಾಗಿದೆ. ಶಿರಸಿ, ಸಿದ್ದಾಪುರ, ಯಲ್ಲಾಪುರ ಭಾಗದಲ್ಲಿ ಸಾಮಾನ್ಯ ಮಳೆ ಸುರಿದಿದೆ. ಹಳಿಯಾಳ ಹಾಗೂ ಮುಂಡಗೋಡು ವ್ಯಾಪ್ತಿಯಲ್ಲಿ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಭವಿಷ್ಯದಲ್ಲಿ ಮಳೆ ಇನ್ನು ಅಧಿಕಗೊಳ್ಳುವ ಸಾದ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Leave a Comment