ಕಾರವಾರ:
ಗ್ರಾಮ ಲೆಕ್ಕಾಧಿಕಾರಿಗಳಿಗೆ ಜಾಬ್ ಚಾರ್ಟ್ನಲ್ಲಿರುವಂತೆ ಕೆಲಸ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಕೇಂದ್ರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಸಾಂಕೇತಿಕ ಮುಷ್ಕರ ನಡೆಸಿದರು.
ರಾಜ್ಯ ಸರಕಾರಕ್ಕೆ ಗ್ರಾಮ ಲೆಕ್ಕಾಧಿಕಾರಿಗಳಿಗಾಗುತ್ತಿರುವ ಸೇವಾ ನಿಯಮದ ಅನ್ಯಾಯಗಳು, ಕ್ಷೇತ್ರ ಕಾರ್ಯದಲ್ಲಾಗುವ ತೊಂದರೆಗಳು, ತಂತ್ರಾಂಶಗಳಿಂದ ಹೇರಲಾಗುವ ಮಾನಸಿಕ ಮತ್ತು ದೈಹಿಕ ಒತ್ತಡಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ನಿವಾರಿಸಿ ಕೆಲ ಬೇಡಿಕೆಗಳನ್ನು ಈಡೇರಿಸುವಂತೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಆದರೆ ಸರಕಾರದಿಂದ ಕಂದಾಯ ಸಚಿವರಾಗಲೀ, ಕಂದಾಲ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾಗಲಿ ಸಕಾರಾತ್ಮಕ ಪ್ರತಿಕ್ರಿಯೆ ನಿಡಿಲ್ಲ. ಇದರಿಂದಾಗಿ ಗ್ರಾಮ ಲೆಕ್ಕಾಧಿಕಾರಿಗಳಿಗೆ ತೀವೃ ನಿರಾಶೆಯಾಗಿದೆ ಎಂದು ದೂರಿದರು. ಅನ್ಯ ಇಲಾಖೆಯ ಅಧಿಕಾರಿಗಳು ಅವರ ಇಲಾಖಾ ತಾಂತ್ರಿಕ ಕೆಲಸಗಳನ್ನು ಹಾಗೂ ತಂತ್ರಾಂಶಗಳನ್ನು ಅಭಿವೃದ್ಧಿ ಪಡಿಸಿ ತಾಂತ್ರಿಕೇತರ ಸಿಬ್ಬಂದಿಗಳಾದ ಗ್ರಾಮ ಲೆಕ್ಕಾಧಿಕಾರಿಗಳನ್ನು ಬಳಸಿಕೊಳ್ಳಲಾಗುತ್ತಿದೆ. ಜಿಲ್ಲಾಧಿಕಾರಿಗಳ ಮೂಲಕ ವಿಡಿಯೋ ಕಾನ್ಫರೆನ್ಸ್ ನಡೆಸಿ ತಾಂತ್ರಿಕ ಕೆಲಸಗಳನ್ನು ನಿರ್ವಹಿಸುವಂತೆ ಗ್ರಾಮ ಲೆಕ್ಕಾಧಿಕಾರಿಗಳ ಮೇಲೆ ಮಾನಸಿಕ ಒತ್ತಡ ನೀಡಲಾಗುತ್ತಿದೆ. ಇದರಿಂದಾಗಿ ಗ್ರಾಮ ಲೆಕ್ಕಾಧಿಕಾರಿಗಳಿಗೆ ಕೌಟುಂಬಿಕ ಜೀವನವೇ ಇಲ್ಲದಂತಾಗಿದೆ ಎಂದು ಆರೋಪಿಸಿದರು.
ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗೆ ಸಂಬಂಧಿಸಿದಂತೆ ಸರಕಾರವು ಅವರು ನಿರ್ವಹಿಸಬೇಕಾದ ಕಾರ್ಯಗಳ ಬಗ್ಗೆ ಆದೇಶದಲ್ಲಿ ತಿಳಿಸಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಅಧಿಕಾರಿಗಳು ತಮಗೆ ಮನಸಿಗೆ ತೋಚುವ ಕಾರ್ಯಗಳನ್ನು ನಿರ್ವಹಿಸಲು ಗ್ರಾಮ ಲೆಕ್ಕಾಧಿಕಾರಿಗಳಿಗೆ ಒತ್ತಡ ಹೇರುತ್ತಿದ್ದಾರೆ. ಆದ್ದರಿಂದ ತಮಗೆ ನೀಡಲಾಗಿರುವ ಜಾಬ್ ಕಾರ್ಡ್ನಂತೆ ಕೆಲಸ ಮಾಡಲು ಅವಕಾಶ ನೀಡಬೇಕು ಅಥವಾ ನೂತನ ಜಾಬ್ ಕಾರ್ಡ್ ನೀಡಿ ಅದಕ್ಕೆ ಸರಿಸಮಾನವಾದ ವೇತನವನ್ನು ನೀಡಬೇಕು. ಗ್ರಾಮ ಲೆಕ್ಕಾಧಿಕಾರಿಗಳಿಗೆ ಮುಂಬಡ್ತಿಯಲ್ಲಿ ಅನ್ಯಾಯವಾಗುತ್ತಿದೆ. ಈ ಪದೋನ್ನತಿಯಲ್ಲ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸ ಬೇಕು ಎಂದು ಆಗ್ರಹಿಸಿದರು. ಸಕಾಲದ ಅಧಿನಿಯಮದ ಪ್ರಕಾರ ವಿವಿಧ ಸೇವೆಗಳಿಗೆ ನಿಗದಿಪಡಿಸಿದ ಕಾಲಮಿತಿಯಲ್ಲಿ ಸಾರ್ವಜನಿಕರಿಗೆ ಸೇವೆಯನ್ನು ನೀಡಲಾಗುತ್ತಿದ್ದರೂ ಕೂಡ ಒತ್ತಡ ಹೇರಿ ಅವಸರದಲ್ಲಿ ಕಾರ್ಯ ನಿರ್ವಹಿಸುವಂತೆ ಹೇಳಲಾಗುತಿದ್ದು ಇದು ಹಿಂಸೆಯಾಗುತ್ತಿದೆ. ಆದ್ದರಿಂದ ಸಕಾಲ ರ್ಯಾಂಕಿಂಗ್ ವ್ಯವಸ್ಥೆಯನ್ನು ರದ್ದು ಗೊಳಿಸಬೇಕು. ಸರಕಾರದ ಕೆಲವು ಅಧಿಕಾರಿಗಳು ಜಿಲ್ಲಾಧಿಕಾರಿಗಳ ಮುಖಾಂತರ ವಿಡಿಯೋ ಕಾನ್ಫರೆನ್ಸ್ ನಡೆಸಿ ಸರಕಾರಿ ರಜಾದಿನಗಳಲ್ಲೂ ಕೂಡ ಬಿಡುವನ್ನು ನೀಡದೆ ಇರುವುದರಿಂದ ಗ್ರಾಮ ಲೆಕ್ಕಾಧಿಕಾರಿಗಳ ಮಾನಸಿಕ ನೆಮ್ಮದಿ ಹಾಳಾಗುತ್ತಿದೆ. ಆದ್ದರಿಂದ ರಜಾದಿನಗಳಲ್ಲಿ ಕೆಲಸದ ಒತ್ತಡ ಹೇರಬಾರದು. ಗ್ರಾಮ ಲೆಕ್ಕಾಧಿಕಾರಿಗಳ ಮೇಲೆ ಹಲ್ಲೆ ಹಾಗೂ ದೌರ್ಜನ್ಯ ಮಾಡುವ ವ್ಯಕ್ತಿಗಳ ಮೇಲೆ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ಎಲ್ಲ ಬೇಡಿಕೆಗಳಿಂದ ಸರಕಾರಕ್ಕೆ ಯಾವುದೇ ಆರ್ಥಿಕ ಹೊರೆಯಾಗುವುದಿಲ್ಲ. ಆದ್ದರಿಂದ ಕೂಡಲೇ ಸರಕಾರವು ಗ್ರಾಮ ಲೆಕ್ಕಾಧಿಕಾರಿಗಳ ಸಮಸ್ಯೆಯನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದೆ ಉಗ್ರ ಹೋರಾಟ ನಡೆಸಿ ಕುಟುಂಬ ಸಮೇತರಾಗಿ ಬೀದಿಗಿಳಿದು ಅರ್ನಿದಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ನಂತರ ಪ್ರತಿಭಟನಾಕಾರರು ತಮ್ಮ ಬೇಡಿಕೆಗಳ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಎ.ವಿ ಪಾಟೀಲ್, ಎಸ್.ಬಿ. ಜಾದವ್, ರವಿ ಕಮ್ಮಾರ, ಸಂದ್ಯಾ ವಿ ಪಾಟೀಲ್, ಭಾರತಿ ಎಸ್. ಸಾವಿತ್ರಿ ಹಳಿಯಾಳ ಇತರರು ಭಾಗವಹಿಸಿದ್ದರು
Leave a Comment