ಕಾರವಾರ: ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಸಮುದಾಯದ ಪ್ರಮುಖರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ನಂತರ ತಮ್ಮ ಬೇಡಿಕೆಗಳ ಪಟ್ಟಿಯನ್ನು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ರವಾನಿಸಿದರು.
ಅಗಸ, ರಜಕ, ಪರಿಟ ಎಂದು ಗುರುತಿಸಿಕೊಂಡಿರುವ ಮಡಿವಾಳ ಸಮುದಾಯವೂ ಕರ್ನಾಟಕದಲ್ಲಿ ಸುಮಾರು 15 ಲಕ್ಷ ಜನ ಸಂಖ್ಯೆಯನ್ನು ಹೊಂದಿದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದೂಳಿದವರೇ ಹೆಚ್ಚಿರುವ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಿದರೆ ಸಮಾಜದ ಅಭಿವೃದ್ದಿಯಾಗುತ್ತದೆ. ಅಸ್ಸಾಂ, ತ್ರಿಪುರಾ, ಉತ್ತರ ಪ್ರದೇಶ, ರಾಜಸ್ಥಾನ, ಸಿಕ್ಕಿಂ, ಬಿಹಾರ ಮೊದಲಾದ ರಾಜ್ಯಗಳಲ್ಲಿ ಮಡಿವಾಳ ಸಮಾಜದವರನ್ನು ಪರಿಶಿಷ್ಟ ಜಾತಿಗೆ ಸೇರಿಸಲಾಗಿದೆ. ಆದರೆ, ಕರ್ನಾಟಕದಲ್ಲಿ ಮಾತ್ರ ಈವರೆಗೂ ತಮ್ಮ ಬೇಡಿಕೆ ಈಡೇರಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.
1978ರಿಂದಲೂ ಕರ್ನಾಟಕ ರಾಜ್ಯ ಮಡಿವಾಳ ಸಂಘದವರು ತಮ್ಮ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಸರ್ಕಾರವನ್ನು ಒತ್ತಾಯಿಸುತ್ತ ಬಂದಿದ್ದಾರೆ. ಈವರೆಗೆ ಹಲವು ಸಮಾವೇಶ, ಸಭೆಗಳನ್ನು ನಡೆಸಿ ಸರ್ಕಾರದ ಮೇಲೆ ಒತ್ತಡ ತರಲಾಗಿದೆ. ಅರ್ಜಿಗಳನ್ನು ಸಲ್ಲಿಸಲಾಗಿದೆ. ಇಷ್ಟಾದರೂ ನಮ್ಮ ಬೇಡಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಆರೋಪಿಸಿದರು. ಸರ್ಕಾರವೇ ನೇಮಿಸಿದ ಡಾ. ಅನ್ನಪೂರ್ಣಮ್ಮನವರ ವರದಿ ಅನುಸಾರ ಮಡಿವಾಳ ಸಮುದಾಯಕ್ಕೆ ವಿವಿಧ ಸವಲತ್ತುಗಳನ್ನು ಒದಗಿಸಬೇಕು. ಕೂಡಲ ಸಂಗಮದಲ್ಲಿ ಮುಖ್ಯಮಂತ್ರಿಗಳು ನಮ್ಮ ಬೇಡಿಕೆ ಈಡೇರಿಸುವದಾಗಿ ನೀಡಿದ ವಾಗ್ದಾನ ಮಾಡಿದ್ದು, ಇದನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು. ತಮ್ಮ ಬೇಡಿಕೆ ಈಡೇರದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸುವದಾಗಿ ಎಚ್ಚರಿಸಿದರು.
ಸಂಘಟನೆ ಪ್ರಮುಖರಾದ ವಿ.ಬಿ ಹೊಸೂರು, ಅಶೋಕ ಮಡಿವಾಳ, ನಾಗೇಶ ಮಡಿವಾಳ, ಹೂವಪ್ಪ ಮಡಿವಾಳ, ರಮೇಶ ಮಡಿವಾಳ ಇತರರಿದ್ದರು.
Leave a Comment