ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ದಿಯ ಜೊತೆ ಶಿಕ್ಷಣ, ಆರೋಗ್ಯ, ಉದ್ಯೋಗ ಕ್ಷೇತ್ರಗಳಲ್ಲಿ ಹಲವು ರೀತಿಯ ಅಭಿವೃದ್ದಿ ಕೆಲಸಗಳನ್ನು ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು.
ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಬುಧವಾರ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನಡೆಸಿ ಅವರು ಮಾತನಾಡಿದರು.
ಜಿಲ್ಲೆಯ ಪ್ರವಾಸಿ ತಾಣಗಳನ್ನು ಜಗತ್ತಿಗೆ ಪರಿಚಯಿಸಲು ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರವಾಸೋದ್ಯಮದ ಮೂಲಭೂತ ಸೌಕರ್ಯ ಹಾಗೂ ಇನ್ನಿತರ ಅಭಿವೃದ್ಧಿ ಕಾರ್ಯಗಳಿಗೆ ಸುಮಾರು 250 ಕೋಟಿ ನೀಡಲಾಗಿದೆ ಎಂದು ಹೇಳಿದರು. ಸರಕಾರ ಹಿಂದುಳಿದವರ, ದಿನ ದಲಿತರ, ಶೈಕ್ಷಣಿಕವಾಗಿ ಮಕ್ಕಳ ಅಭಿವೃದ್ಧಿಗೆ ಹೆಚ್ಚಿನ ಗಮನ ನೀಡಿದೆ. ಜಿಲ್ಲೆಯಲ್ಲಿ ಹಣದ ಕೊರತೆಯಾಗದಂತೆ ಅಭಿವೃದ್ಧಿ ಕೆಲಸ ನಡೆಸಲಾಗುತ್ತಿದೆ. ಈಗಾಗಲೇ ಜಿಲ್ಲೆಯ ವಿವಿಧ ಭಾಗಗಳಲ್ಲಿ 10 ಸಾವಿರ ಮನೆಗಳನ್ನು ನಿರ್ಮಿಸಿಕೊಡಲಾಗಿದೆ. ಸುಮಾರು 600 ಗ್ರಾಮಗಳಿಗೆ ಕ್ರೀಡಾ ಸಾಮಗ್ರಿಗಳ ವಿತರಣೆ ಮಾಡಲಾಗುತ್ತಿದೆ. ಇಲ್ಲದೆ ಆಸ್ಪತ್ರೆ, ಸೇತುವೆಗಳ ಮಂಜೂರಿ, ರಸ್ತೆ ಕಾಮಗಾರಿ ನಡೆಸಲಾಗಿದೆ ಎಂದು ಹೇಳಿದರು.
ಜಿಲ್ಲೆಯ ಕಲೆ ಸಂಸ್ಕøತಿಯನ್ನು ಉಳಿಸುವ ನಿಟ್ಟಿನಲ್ಲಿ ಕರಾವಳಿ ಉತ್ಸವವನ್ನು ನಡೆಸಲಾಗುತ್ತಿದೆ. ಇದಲ್ಲದೆ ಅಂತರಾಷ್ಟ್ರೀಯ ಸ್ಕೂಬಾ ಡೈವಿಂಗ್ ಉತ್ಸವ, ಹಾರ್ನ್ಬೆಲ್ ಉತ್ಸವ, ಕದಂಬೋತ್ಸವ ನಡೆಸಲು ತಿರ್ಮಾನಿಸಲಾಗಿದೆ. ಅಲ್ಲದೆ ಜನರ ಬಹು ನೀರಿಕ್ಷಿತ ಹುಬ್ಬಳ್ಳಿ ಅಂಕೋಲಾ ರೈಲು ಮಾರ್ಗ, ಅಳ್ವಾವರ ಅಂಬೇವಾಡಿ ಪ್ಯಾಸೆಂಜರ್ ರೈಲು ಓಡಾಟ ಮತ್ತು ಸಿದ್ದಾಪುರ-ಶಿರಸಿಗೆ ರೈಲು ಸಂಪರ್ಕ ಕಲ್ಪಿಸುವ ಕುರಿತು ಕೇಂದ್ರ ರೈಲ್ವೆ ಸಚಿವರಿಗೆ ಒತ್ತಾಯಿಸಲಾಗುವುದು ಎಂದರು. ಕೇಂದ್ರ ಸರಕಾರದಿಂದ ಬಿಡುಗಡೆಯಾಗುವ ಅನುದಾನ ಜನಸಂಖ್ಯೆ ಆಧಾರದ ಮೇಲೆ ಬಿಡುಗಡೆಯಾಗುತ್ತಿದ್ದು, ಇದು ಭೌಗೋಳಿಕವಾಗಿ ವಿಸ್ತಾರವಾಗಿರುವ ನಮ್ಮ ಜಿಲ್ಲೆಗೆ ಅನ್ಯಾಯವಾಗುತ್ತಿದೆ. ಈ ನಿಟ್ಟಿನಲ್ಲಿ ವಿಶೇಷವಾಗಿ ಪರಿಗಣಿಸಿ ಹೆಚ್ಚಿನ ಅನುದಾನಕ್ಕೆ ಒತ್ತಾಯಿಸಲಾಗುವುದು ಎಂದು ಹೇಳಿದರು.
ಕಳೆದ ನಾಲ್ಕು ವರ್ಷದಲ್ಲಿ ಅಭಿವೃದ್ಧಿಯಲ್ಲಿ ರಾಜ್ಯವು ಗಣನೀಯ ಸಾಧನೆ ಮಾಡಿದೆ. ತಂತ್ರಜ್ಞಾನದಲ್ಲಿ ವಿಶ್ವಕ್ಕೆ ಮಾದರಿಯಾಗುವ ರಿತಿಯಲ್ಲಿ ಬೆಳೆಯುತ್ತಿದೆ. ಉದ್ಯೋಗ ಸೃಷ್ಟಿಯಲ್ಲಿ ಕೂಡ ರಾಜ್ಯ ಸರಕಾರ ಮುಂದಿದ್ದು, ಕಳೆದ ನಾಲ್ಕು ವರ್ಷದಲ್ಲಿ 14 ಲಕ್ಷ ಉದ್ಯೋಗ ಸೃಷ್ಟಿ ಮಾಡಿದೆ. ಆದರೆ ಕೇಂದ್ರ ಸರಕಾರ 2 ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿ ಇದೀಗ ವಿಫಲವಾಗಿದೆ ಎಂದರು. ಸರ್ಕಾರ ಪ್ರಣಾಳಿಕೆಯಲ್ಲಿ ನೀಡಿದ 165 ಭರವಸೆಗಳಲ್ಲಿ 155 ಭರವಸೆಗಳನ್ನು ಈಡೇರಿಸಿದೆ. ಹಲವು ಭಾಗ್ಯಗಳನ್ನು ಜಾರಿಗೊಳಿಸಿ ಜನತೆ ನೆಮ್ಮದಿಯಿಂದ ಬದುಕುವಂತೆ ಮಾಡಿದೆ. 1.4 ಕೋಟಿ ಮಕ್ಕಳಿಗೆ ಕ್ಷೀರಭಾಗ್ಯ ಕರುಣಿಸಿದ್ದು, ಇದಲ್ಲದೆ, ಬಟ್ಟೆ, ಹಾಸ್ಟಲ್, ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡಿ ಶೈಕ್ಷಣಿಕ ಪ್ರಗತಿಗೆ ಸಹಕಾರಿ ನೀಡಿದೆ ಎಂದರು.
* ಪಥಸಂಚಲನ:
ಕನ್ನಡ ರಾಜ್ಯೋತ್ಸವದಲ್ಲಿ ಭಾಗವಹಿಸಿದ್ದ ವಿವಿಧ ತುಕಡಿಗಳಿಂದ ಸಚಿವರು ಗೌರವ ವಂದನೆ ಸ್ವೀಕರಿಸಿದರು. ಬಳಿಕ ಪರೇಡ್ ನಡೆಸಿದ ಪೊಲೀಸ್ ಸಶಸ್ತ್ರ ಮಿಸಲು ಪೊಲೀಸ್, ನಾಗರಿಕ ಪೊಲೀಸ್ ತುಕಡಿ, ಗ್ರಹ ರಕ್ಷಕ ದಳ, ಅರಣ್ಯ ಇಲಾಖೆ ಎನ್ಸಿಸಿ ಹಾಗೂ ವಿವಿಧ ಕಾಲೇಜುಗಳ ಒಟ್ಟು 14 ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಅಲ್ಲದೆ ಕಾರ್ಯಕ್ರಮದ ಅಂತ್ಯದಲ್ಲಿ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.
* ಮೆರವಣಿಗೆ:
ಜಿಲ್ಲಾಧಿಕಾರಿ ಕಚೇರಿ ಎದುರು ತಾಯಿ ಭುವನೇಶ್ವರಿ ಪ್ರತಿಮೆಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ ದೇಶಪಾಂಡೆ ಅವರು ಪುಷ್ಪಾರ್ಚನೆ ಮಾಡಿದರು. ಬಳಿಕ ವಿವಿಧ ಇಲಾಖೆಗಳ ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆಯು ಜಿಲ್ಲಾಧಿಕಾರಿ ಕಚೇರಿಯಿಂದ ನಗರದ ರಮುಖ ಬೀದಿಗಳಲ್ಲಿ ಸಂಚರಿಸಿ ಬಳಿಕ ಪೊಲೀಸ್ ಪರೇಡ್ ಮೈದಾನಕ್ಕೆ ತೆರಳಿತು. ವಿವಿಧ ಇಲಾಖೆಗಳು ಭಾಗವಹಿಸಿದ್ದ ಈ ಸ್ತಬ್ಧ ಚಿತ್ರಗಳ ಪ್ರದಶನದಲ್ಲಿ ಅರಣ್ಯ ಇಲಾಖೆಯ ಸ್ತಬ್ಧ ಚಿತ್ರ ಪ್ರಥಮ, ಸೆಂಟ್ ಜೊಸೇಫ್ ಪ್ರೌಢ ಮತ್ತು ಆಂಗ್ಲ ಮಾಧ್ಯಮ ಶಾಲೆ ದ್ವಿತೀಯ, ಸಮಾಜ ಕಲ್ಯಾಣ ಇಲಾಖೆಯ ಸ್ತಬ್ಧ ಚಿತ್ರ ಮೂರನೇ ಸ್ಥಾನ ಪಡೆದವು. ಕಾರ್ಯಕ್ರಮದಲ್ಲಿ ಶಾಸಕ ಸತೀಶ್ ಸೈಲ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಯಶ್ರೀ ಮೊಗೇರ, ಕರ್ನಾಟಕ ಮಿನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಜೇಂದ್ರ ನಾಯ್ಕ, ತಾ.ಪಂ ಅಧ್ಯಕ್ಷೆ ಪ್ರಮಿಳಾ ನಾಯ್ಕ, ಜಿಲ್ಲಾಧಿಕಾರಿ ಎಸ್.ಎಸ್. ನಕುಲ್, ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ್, ಜಿ.ಪಂ ಸಿಇಓ ಚಂದ್ರಶೇಖರ ನಾಯಕ ಉಪಸ್ಥಿತರಿದ್ದರು.
Leave a Comment