ಹಳಿಯಾಳ:- ಕೊಡಗು ಜಿಲ್ಲೆಯ ಸಂತ್ರಸ್ಥ ಕುಟುಂಬಗಳಿಗೆ ಬಟ್ಟೆಬರೆ ಹಾಗೂ ಅಗತ್ಯ ದಿನಬಳಕೆ ವಸ್ತುಗಳ ನೆರವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 50 ಸಾವಿರ ರೂ. ಹೆಚ್ಚುವರಿ ಪರಿಹಾರ ಕೊಡಲು ಸರ್ಕಾರ ತೀರ್ಮಾನಿಸಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ಈ ಕುರಿತು ಶನಿವಾರ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು “ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಕುಟುಂಬಗಳಿಗೆ ಎಸ್.ಡಿ.ಆರ್.ಎಫ್/ ಎನ್.ಡಿ.ಆರ್.ಎಫ್ ಮಾರ್ಗಸೂಚಿಯ ಪ್ರಕಾರ ಬಟ್ಟೆಬರೆ ನೆರವಿಗೆಂದು 1,800ರೂ ಮತ್ತು ದಿನಬಳಕೆ ವಸ್ತುಗಳಿಗೆಂದು 2ಸಾವಿರ ರೂ.ಮಾತ್ರ(ಒಂದು ಕುಟುಂಬಕ್ಕೆ 3800ರೂ ಮಾತ್ರ) ಕೊಡಲು ಅವಕಾಶವಿದೆ. ಆದರೇ ಇದು ಸಾಕಾಗುವುದಿಲ್ಲ ಎಂದು ಅರಿತಿರುವ ಸರ್ಕಾರ ಹೆಚ್ಚುವರಿ ಪರಿಹಾರ ನೀಡಲು ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.
ಕೊಡಗಿಗೆ ತಾವು ಸೇರಿದಂತೆ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಅನೇಕ ಸಚಿವರು ಇತ್ತೀಚೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪರಿಹಾರ ಮೊತ್ತವನ್ನು ಹೆಚ್ಚಿಸಬೇಕೆಂದು ಸಂತ್ರಸ್ಥರು ಮನವಿ ಮಾಡಿಕೊಂಡಿದ್ದರು. ಅವರ ಮನವಿಗೆ ಸ್ಪಂದಿಸಿ ಈ ಕ್ರಮ ಕೈಗೊಂಡಿದ್ದು, ಇದಕ್ಕೆ ಸಚಿವ ಸಂಪುಟ ಒಪ್ಪಿಗೆಯೂ ದೊರೆತಿದೆ ಎಂದು ಸಚಿವ ದೇಶಪಾಂಡೆ ಮಾಹಿತಿ ನೀಡಿದ್ದಾರೆ.
Leave a Comment