ವಿಜ್ಞಾನಿಯೊಬ್ಬನ ಕೂದಲ ವಿನ್ಯಾಸವನ್ನು ಕಾಲೇಜು ಯುವಕರು ಅನುಸರಿಸಿದ ದಿನ ನಮ್ಮಲ್ಲಿ ವಿಜ್ಞಾನ, ತಂತ್ರಜ್ಞಾನ ಅಭಿವೃದ್ಧಿ ಕಾಣಲಿದೆ. ಸ್ಟಾರ್ ನಟರು ಇದ್ದಂತೆ, ವಿಜ್ಞಾನಿಗಳು ತಾರೆಯರಾಗಬೇಕಿದೆ’ ಎಂದು ಸಿಎಫ್ಟಿಆರ್ಐನ ನಿವೃತ್ತ ವಿಜ್ಞಾನಿ ಹಾಗೂ ಹಿರಿಯ ವಿಜ್ಞಾನ ಬರಹಗಾರ ಕೊಳ್ಳೇಗಾಲ ಶರ್ಮ ಅಭಿಪ್ರಾಯಪಟ್ಟರು.

ಪ್ರೆಸ್ ಇನ್ಫರ್ಮೇಷನ್ ಬ್ಯುರೋ ಮತ್ತು ಕರ್ನಾಟಕ ಪತ್ರಕರ್ತೆಯರ ಸಂಘ ಶುಕ್ರವಾರ ಜಂಟಿಯಾಗಿ ಆಯೋಜಿಸಿದ್ದ ಭಾರತದಲ್ಲಿ ವಿಜ್ಞಾನದ ಬೆಳವಣಿಗೆ' ಕುರಿತ ವೆಬಿನಾರ್ ನಲ್ಲಿ
ಅಭಿವೃದ್ಧಿಶೀಲ ಭಾರತದಲ್ಲಿ ವಿಜ್ಞಾನ’ ವಿಷಯದ ಕುರಿತು ಅವರು ಮಾತನಾಡಿದರು. ಡಿಸೆಂಬರ್ 22ರಿಂದ ಆರಂಭವಾಗಲಿರುವ `ಭಾರತ ಅಂತಾರಾಷ್ಟ್ರೀಯ ವಿಜ್ಞಾನ ಮಹೋತ್ಸವ -2020’ಕ್ಕೆ ಪೂರ್ವಭಾವಿಯಾಗಿ ಈ ವೆಬಿನಾರ್ ಆಯೋಜಿಸಲಾಗಿತ್ತು.
ಭಾರತವು ಸಾವಿರಾರು ವರ್ಷಗಳಿಂದ ಅಭಿವೃದ್ಧಿ ಪಥದಲ್ಲಿದ್ದರೂ ಯಂತ್ರಗಳನ್ನಾಧರಿಸಿದ ಕೈಗಾರಿಕಾ ಕ್ರಾಂತಿ ಸಮಯದಲ್ಲಿ ಹಿಂದಕ್ಕೆ ಉಳಿಯಿತು. ಇದಕ್ಕೆ ಇಲ್ಲಿನ ಸಾಮಾಜಿಕ, ಆರ್ಥಿಕ ಪರಿಸ್ಥಿತಿಗಳು ಕಾರಣ ಇರಬಹುದು. ಆದರೆ, 1958ರಲ್ಲಿ ಸ್ವಾತಂತ್ರ್ಯ ಬಂದ ಹೊಸದರಲ್ಲೇ ದೇಶದ ಅಭಿವೃದ್ಧಿಗೆ ವಿಜ್ಞಾನದ ಬೆಳವಣಿಗೆ ಅನಿವಾರ್ಯ ಎಂದು ಮನಗಂಡು ವೈಜ್ಞಾನಿಕ ನೀತಿಯನ್ನು ಆಡಳಿತದಲ್ಲಿ ಅಳವಡಿಸಿಕೊಂಡಿತ್ತು. ವೈಜ್ಞಾನಿಕ ಸಂಶೋಧನೆ ಮತ್ತು ಕೈಗಾರಿಕೆಗಳ ಬೆಳವಣಿಗೆಯ ನಡುವಿನ ಸಂಬಂಧ ಅರಿತುಕೊಂಡು ಸ್ವಾತಂತ್ರ್ಯಪೂರ್ವದಲ್ಲಿ 1942ರಲ್ಲೇ ಕೌನ್ಸಿಲ್ ಆಫ್ ಸೈಂಟಿಫಿಕ್ ಎಂಡ್ ಇಂಡಸ್ಟ್ರಿಯಲ್ ರಿಸರ್ಚ್' ಸ್ಥಾಪಿಸಲಾಗಿತ್ತು. ಪರಮಾಣು ವಿಜ್ಞಾನ, ಬಾಹ್ಯಾಕಾಶ ತಂತ್ರಜ್ಞಾನ, ಕೈಗಾರಿಕೆ, ಕೃಷಿ ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಭಾರತ ಸಾಕಷ್ಟು ಪ್ರಗತಿ ಸಾಧಿಸಿದೆ. ಆದರೆ, ದೇಶದ ಇತರ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಬೇಕಾದ ಸಲಕರಣೆ, ತಂತ್ರಜ್ಞಾನಗಳನ್ನು ಆಮದು ಮಾಡಿಕೊಳ್ಳದಂತೆ ನಾವು ಸ್ವಾವಲಂಬನೆ ಸಾಧಿಸುವ ಅಗತ್ಯವಿದೆ' ಎಂದು ಶರ್ಮ ಅವರು ಪ್ರತಿಪಾದಿಸಿದರು.
ಭಾರತದಲ್ಲಿ ಕಂಪ್ಯೂಟರ್ ವಿಜ್ಞಾನದ ಇತಿಹಾಸ’ ದ ಕುರಿತು ಮಾತನಾಡಿದ ಇಜ್ಞಾನ.ಕಾಮ್ ಸಂಪಾದಕ ಶ್ರೀನಿಧಿ ಟಿ.ಜಿ. ಅವರು, 1931ರಲ್ಲಿ ಕೋಲ್ಕತ್ತದಲ್ಲಿ
ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಇನ್ಸ್ಟಿಟ್ಯೂಟ್’ ಸ್ಥಾಪಿಸಿದ ಪ್ರಶಾಂತ್ ಚಂದ್ರ ಮಹಾಲಾನೋಬಿಸ್ ಅವರು ವಿದೇಶಗಳಲ್ಲಿ ನಡೆಯುತ್ತಿದ್ದ ಸಂಶೋಧನೆಗಳನ್ನು ಗಮನಿಸಿ, ತಮ್ಮ ಸಂಸ್ಥೆಯ ಕೆಲಸಗಳಿಗಾಗಿ ಕಂಪ್ಯೂಟರ್ ಅಗತ್ಯ ಮನಗಂಡು 1953ರಲ್ಲೇ ಅನಲಾಗ್ ಕಂಪ್ಯೂಟರ್ ಅನ್ನು ತಮ್ಮ ಪ್ರಯೋಗಾಲಯದಲ್ಲೇ ರೂಪಿಸಿದರು. ಆನಂತರ ಭಾರತದ ಪರಮಾಣು ವಿಜ್ಞಾನದ ಪಿತಾಮಹ ಅನಿಸಿಕೊಂಡ ಡಾ. ಹೋಮಿ ಭಾಬಾ ಅವರು, ಮುಂಬೈನ ಟಾಟಾ ಇನ್ಸ್ಟಿಟ್ಯೂಟ್ ಆಫ್ ಫಂಡಮಂಟಲ್ ರಿಸರ್ಚ್ನಲ್ಲಿ ಕಂಪ್ಯೂಟರ್ ಅಭಿವೃದ್ಧಿಗೆ ಒತ್ತು ನೀಡಿದರು. ಟಿಐಎಫ್ಆರ್ನ ಪ್ರೊ. ನರಸಿಂಹನ್ ನೇತೃತ್ವದ ತಂಡ ಸತತ ಸಂಶೋಧನೆ ನಡೆಸಿ, 1960ರಲ್ಲಿ ಎಲೆಕ್ಟ್ರಾನಿಕ್ ಡಿಜಿಟಲ್ ಕಂಪ್ಯೂಟರ್ ರೂಪಿಸಿತು. ಇದು ಭಾರತದಲ್ಲೇ ಸಿದ್ಧಗೊಂಡ ಮೊದಲ ಡಿಜಿಟಲ್ ಕಂಪ್ಯೂಟರ್’ ಎಂದು ಮಾಹಿತಿ ನೀಡಿದರು. 50, 60 ದಶಕದಲ್ಲೇ ನಮ್ಮ ವಿಜ್ಞಾನಿಗಳು ಮಾಡಿದ ಸಾಧನೆಯನ್ನು ಸ್ಫೂರ್ತಿಯಾಗಿಟ್ಟುಕೊಂಡು ಕಂಪ್ಯೂಟರ್ ಕ್ಷೇತ್ರದಲ್ಲಿ ನಾವು ಕೇವಲ ಬಳಕೆದಾರರಾಗದೇ ಮತ್ತಷ್ಟು ಆವಿಷ್ಕಾರಗಳನ್ನು ಮಾಡಬೇಕಿದೆ ಎಂದು ಶ್ರೀನಿಧಿ ಅವರು ಅಭಿಪ್ರಾಯಪಟ್ಟರು.
`ಎಲ್ ಅಂಡ್ ಟಿ’ ಸಂಸ್ಥೆಯ ಡಿಜಿಟಲ್ ಸೇವೆಗಳ ಮುಖ್ಯಸ್ಥರಾದ ಶಶಿಧರ್ ಡೊಂಗ್ರೆ ಅವರು, ಜಗತ್ ಪ್ರಸಿದ್ಧ ವಿಜ್ಞಾನಿಗಳ ಬಗ್ಗೆ ನಾಟಕ ಪ್ರಸ್ತುತಪಡಿಸಿ ವಿಜ್ಞಾನವನ್ನು ಜನಪ್ರಿಯಗೊಳಿಸಬಹುದಾಗಿದೆ ಎಂದು ಹೇಳಿದರು. ಯುರೋಪ್ನಲ್ಲಿ ವಿಜ್ಞಾನ ನಾಟಕಗಳು ಬಹು ಪ್ರಸಿದ್ಧವಾಗಿದ್ದು, ಕೆಲ ನಾಟಕಗಳು ಕನ್ನಡಕ್ಕೂ ಅನುವಾದಗೊಂಡು ರಂಗಕ್ಕೆ ಬಂದಿವೆ ಮತ್ತು ಜನಪ್ರಿಯವೂ ಆಗಿವೆ ಎಂದು ಅವರು ತಿಳಿಸಿದರು.
ಪ್ರೆಸ್ ಇನ್ಫರ್ಮೇಷನ್ ಬ್ಯುರೋ ಅಧಿಕಾರಿ ಜಯಂತಿ ಸ್ವಾಗತಿಸಿದರು. ಪತ್ರಕರ್ತೆಯರ ಸಂಘದ ಕಾರ್ಯದರ್ಶಿ ಮಾಲತಿ ಭಟ್ ವಂದಿಸಿದರು. ಪತ್ರಕರ್ತೆಯರ ಸಂಘದ ಅಧ್ಯಕ್ಷೆ ಶಾಂತಲಾ ಧರ್ಮರಾಜ್, ಹಿರಿಯ ಪತ್ರಕರ್ತೆಯರಾದ ಎಂ. ಪಿ. ಸುಶೀಲಾ, ಕೆ. ಎಚ್. ಸಾವಿತ್ರಿ, ಸಿ. ಜಿ. ಮಂಜುಳಾ, ಪತ್ರಕರ್ತ ಮತ್ತು ಬರಹಗಾರ ಜಿ. ಎನ್. ಮೋಹನ್, ಪತ್ರಕರ್ತೆಯರಾದ ಎಸ್. ನಯನಾ, ಉಷಾ ಕಟ್ಟೆಮನಿ, ವಾಣಿಶ್ರೀ ಪತ್ರಿ, ಚಿತ್ರಾ ಫಾಲ್ಗುಣಿ, ಶ್ರೀಜಾ ವಿ. ಎನ್. ಜಗದೀಶ್ವರಿ ವೆಬಿನಾರ್ನಲ್ಲಿ ಪಾಲ್ಗೊಂಡಿದ್ದರು.
Leave a Comment