ಕಾರವಾರ: ಬಿಜೆಪಿಯಿಂದ ರಾಜ್ಯದಾದ್ಯಂತ ಜನಸ್ವರಾಜ್ ಯಾತ್ರೆಯನ್ನು ನಾಲ್ಕು ತಂಡಗಳ ಮೂಲಕ ಕೈಗೊಳ್ಳಲಾಗಿದ್ದು, ಉತ್ತರಕನ್ನಡ ಜಿಲ್ಲೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನ.18 ರಂದು ಆಗಮಿಸಲಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ನಾಗರಾಜ ನಾಯಕ ಹೇಳಿದರು.
ನಗರದ ಜಿಲ್ಲಾ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನ.18 ರಿಂದ 22 ರವರೆಗೆ ರಾಜ್ಯದಾದ್ಯಂತ ನಾಲ್ಕು ತಂಡಗಳಲ್ಲಿ ಜನಸ್ವರಾಜ್ ಯಾತ್ರೆ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ನ.18 ರಂದು ಯಲ್ಲಾಪುರದ ಮುಂಡಗೋಡ ರಸ್ತೆಯಲ್ಲಿರುವ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾನಿಲಯದ ಆವರಣದಲ್ಲಿ ಯಾತ್ರೆಯ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಕಾರ್ಯಕ್ರಮವು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿದ್ದು ಪ್ರಮುಖರಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವ ಗೋವಿಂದ ಕಾರಜೋಳ, ಸಾರಿಗೆ ಸಚಿವ ಬಿ.ಶ್ರೀರಾಮುಲು ಸೇರಿ ಹಲವರು ಭಾಗವಹಿಸಲಿದ್ದಾರೆ. ಜನಸ್ವರಾಜ್ ಯಾತ್ರೆಯೂ ಬಿಜೆಪಿ ಕಾರ್ಯಕರ್ತರ ಸಮಾವೇಶವಾಗಿದ್ದು ಕಾರ್ಯಕ್ರಮದಲ್ಲಿ ಭಾಗವಹಿಸಿದ ನಾಯಕರು ಪಕ್ಷದ ಸಂಘಟನೆ ಸೇರಿ ಇತರೆ ವಿಷಯಗಳ ಬಗ್ಗೆ ಸಲಹೆ ಸೂಚನೆ ನೀಡಲಿದ್ದಾರೆ ಎಂದು ಹೇಳಿದರು.
Leave a Comment