ಕುಮಟಾ: ಪಟ್ಟಣದ ರಸ್ತೆ ಬದಿಯ ಫಾಸ್ಟ್ ಫುಡ್ ಸೆಂಟರ್ಗಳ ಮೇಲೆ ದಾಳಿ ನಡೆಸಿದ ಆಹಾರ ಗುಣಮಟ್ಟ ಹಾಗೂ ಸುರಕ್ಷತಾ ಇಲಾಖೆ ಅಧಿಕಾರಿಗಳ ತಂಡ, ಕೆಲ ಅಂಗಡಿಕಾರರಿಗೆ ದಂಡ ವಿಧಿಸಿ ಎಚ್ಚರಿಕೆ ನೀಡಿದೆ.
ಪಟ್ಟಣದ ಗಿಬ್ ಸರ್ಕಲ್, ಮೂರೂರು ಕ್ರಾಸ್ ಹಾಗೂ ಕಿತ್ತೂರ ರಾಣಿ ಚೆನ್ನಮ್ಮ ಉದ್ಯಾನವನದ ಸಮೀಪದಲ್ಲಿರುವ ಫಾಸ್ಟ್ ಫುಡ್ ಸೆಂಟರ್ಗಳಿಗೆ ದಾಳಿ ನಡೆಸಿದ ಆಹಾರ ಗುಣಮಟ್ಟ ಹಾಗೂ ಸುರಕ್ಷತಾ ಇಲಾಖೆ ಅಧಿಕಾರಿ ಡಾ ರಾಜಶೇಖರ ನೇತ್ರತ್ವದ ತಂಡ ಆಹಾರ ಗುಣಮಟ್ಟವನ್ನು ಪರೀಕ್ಷಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಆಹಾರ ಗುಣಮಟ್ಟ ಹಾಗೂ ಸುರಕ್ಷತಾ ಇಲಾಖೆ ಅಧಿಕಾರಿ ಡಾ.ರಾಜಶೇಖರ, ಕಳೆದ 2 ದಿನಗಳಿಂದ ಜಿಲ್ಲೆಯಾದ್ಯಂತ ರಸ್ತೆ ಬದಿಯ ಫಾಸ್ಟ್ ಫುಡ್ ಸೆಂಟರ್ಗಳಿಗೆ ಭೇಟಿ ನೀಡಿ, ಆಹಾರದ ಗುಣಮಟ್ಟ ಹಾಗೂ ಸ್ವಚ್ಛತೆಯನ್ನು ಪರಿಶೀಲಿಸಲಾಗುತ್ತಿದೆ. ಹಾನಿಕಾರಕ ವಸ್ತುಗಳನ್ನು ಕಂಡುಬAದರೆ, ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದೇವೆ. ಫಾಸ್ಟ್ ಫುಡ್ ಸೆಂಟರ್ನವರು ಬಳಸುವ ಕೆಲವು ಪದಾರ್ಥಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದೇವೆ.
ಒಂದು ವೇಳೆ ವಿಷಕಾರಿ ವಸ್ತುಗಳು ದೃಢಪಟ್ಟರೆ ಅಂತಹ ಅಂಗಡಿ ಮಾಲೀಕರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಜಿಲ್ಲೆಯ ಕಾರವಾರದಲ್ಲಿ ಕೆಲ ಅಂಗಡಿಕಾರರ ಮೇಲೆ ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಸ್ವಚ್ಛತೆ ಕಾಪಾಡಿರುವ ಅಂಗಡಿಗಳಿಗೆ ತೆರಳಿ, ಆಹಾರ ವಸ್ತುಗಳನ್ನು ಸೇವಿಸಬೇಕು.
ಸಾರ್ವಜನಿಕರಲ್ಲಿಯೂ ಈ ಕುರಿತು ಜಾಗೃತಿ ಅತ್ಯವಶ್ಯವಾಗಿದೆ. ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಯಾವುದೇ ರೀತಿಯಲ್ಲಿ ಹೊಂದಾಣಿಕೆಯಿಲ್ಲ. ನಿಯಮ ಮೀರಿದ ಅಂಗಡಿಕಾರರ ಮೇಲೆ ಶಿಸ್ತು ಕ್ರಮ ವಹಿಸಲಾಗುತ್ತದೆ.
ಈ ಕಾರ್ಯಾಚರಣೆ ನಿರಂತರವಾಗಿ ನಡೆಯುತ್ತದೆ ಎಂದು ಮಾಹಿತಿ ನೀಡಿದರು. ಈ ಕಾರ್ಯಾಚರಣೆಯಲ್ಲಿ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ಅಧಿಕಾರಿ ಅರುಣ ಕಾಶಿಭಟ್ಟ ಹಾಗೂ ಸಿಬ್ಬಂಧಿ ಉಪಸ್ಥಿತರಿದ್ದರು.
Leave a Comment